ವಿವಿಧ ಕ್ರೀಡಾಕೂಟಗಳಿಗೆ ಸಂಸದ ಗದ್ದಿಗೌಡರ ಚಾಲನೆ
* ರಾಷ್ಟ್ರೀಯ ಕ್ರೀಡಾ ದಿನಾಚರಣೆ
* ಮೇಜರ್ ಧ್ಯಾನಚಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ
ವಿವಿಧ ಕ್ರೀಡಾಕೂಟಗಳಿಗೆ ಸಂಸದ ಗದ್ದಿಗೌಡರ ಚಾಲನೆ
ಬಾಗಲಕೋಟೆ :
ಅಂತರರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳಿಗೆ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡ ಕ್ರೀಡಾಕೂಟದಲ್ಲಿ ಕ್ರಿಕೇಟ್ ಆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಭಾರತ ಶ್ರೇಷ್ಠ ಹಾಕಿ ಆಟಗಾರರಲ್ಲಿ ಒಬ್ಬರಾದ ಮೇಜರ್ ಧ್ಯಾನಚಂದ ಅವರ ಜನ್ಮದಿದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆನ್ನು ಆಚರಿಸಲಾಗುತ್ತದೆ. ಈ ದಿನ ರಾಷ್ಟ್ರದ ಕ್ರೀಡಾವೀರರನ್ನು ಗೌರವಿಸು ದಿನವಾಗಿದೆ. ಮೇಜರ್ ಧ್ಯಾನಚಂದ ಅವರು ಓಲಂಪಿಕ್ ಚಾಂಪಿಯನ್ ಹಾಕಿಯಲ್ಲಿ ಸತತವಾಗಿ ಮೂರು ಬಾರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ಎಂದರು.
ನಮ್ಮ ದಿನನಿತ್ಯದ ಜೀವನ ಶೈಲಿ, ಸರ್ವಾಂಗೀನ ಅಭಿವೃದ್ದಿಗೆ ಕ್ರೀಡೆ ಅವಶ್ಯವಾಗಿದೆ. ಕ್ರೀಡೆ ಮನೋರಂಜನೆಯೊಂದಿಗೆ ಮನೋವಿಕಾಸವನ್ನು ಹೆಚ್ಚಿಸುವ ಕ್ಷೇತ್ರವಾಗಿದ್ದು, ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಕ್ರೀಡಾ ಚಟುವಟಿಕೆಗಳ ಪಾತ್ರ ಮಹತ್ವವಾಗಿದೆ. ಆರೋಗ್ಯಕರ ಜೀವನಶೈಲಿ ಮತ್ತು ಶಾಂತಿಯುತ ಜಗತ್ತಿಗೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳ ಕೊಡುಗೆ ಅಪಾರವಾಗಿದೆ. ಕ್ರೀಡಾ ಮನೋಭಾವನೆಯನ್ನು ಅಳವಡಿಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಹೋದಾಗ ಮಾತ್ರ ನಮ್ಮ ಬದುಕು ಚೆನ್ನಾಗಿರಲು ಸಾದ್ಯವೆಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ ಮೇಜರ್ ಧ್ಯಾನಚಂದ್ ಅವರು ಹಾಕಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಚಾಂಪಿಯನ್ ಪಟ್ಟ ಪಡೆದುಕೊಂಡಿದ್ದಾರೆ. ಅದೇ ರೀತಿಯಲ್ಲಿ ಅನೇಕ ಕ್ರೀಡಾಪಟುಗಳು ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆಗಳು ಕೇವಲ ಮನೋರಂಜನೆ ಮಾತ್ರ ಅಲ್ಲ, ದೈಹಿಕ ಮತ್ತು ಮಾನಸಿಕವಾಗಿ ಸದೃಡರನ್ನಾಗಿ ಮಾಡುತ್ತದೆ. ಜೀವನದಲ್ಲಿ ಶಿಸ್ತು, ಸಹಕಾರ, ಸಹನೆ, ದೈರ್ಯ, ಗುರಿ, ವಿನಯ ಮುಖ್ಯವಾಗಿದ್ದು, ಇವುಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸುವ ಮುಖ್ಯ ಉದ್ದೇಶದ ದೇಶದ ಉತ್ತಮ ಕ್ರೀಡಾಪಟುಗಳನ್ನು ನೆನಪಿಸಿಕೊಳ್ಳುವ ದಿನವಾಗಿದೆ. ದೈಹಿಕವಾಗಿ, ಮಾನಸಿಕವಾಗಿ ಸದೃಡವಾಗಲು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಜೀವನದಲ್ಲಿ ಸೋಲು-ಗೆಲುವು ಇದ್ದೇ ಇರುತ್ತದೆ. ಅದನ್ನು ಸಮನಾಗಿ ತೆಗೆದುಕೊಂಡು ಮುಂದೆ ಸಾಗಬೇಕಿದೆ ಎಂದರು.
ಪ್ರಾರಂಭದಲ್ಲಿ ಮೇಜರ್ ಧ್ಯಾನಚಂದ್ರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಅಲ್ಲದೇ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಆರ್.ಆರ್.ಪಾಟೀಲ ಕ್ರೀಡಾ ದಿನಾಚರಣೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಛಾಯಾಚಿತ್ರ ಲಗತ್ತಿಸಿದೆ. 1 ರಿಂದ 6


